ಬಸವಣ್ಣ   
  ವಚನ - 1324     
 
ಯೋಗಾಂಗ ಭೋಗಾಂಗ ಜ್ಞಾನಾಂಗ ಈ ತ್ರಿವಿಧವನು ಮರೆದು, ಭಕ್ತಿಯೋಗದ ಮೇಲೆ ನಿಂದು, ವೈರಾಗ್ಯಯೋಗದ ಮೇಲೆ ನಿಂದು, ನಡೆದು ನುಡಿದು ತೋರುವರು ಎಮ್ಮ ಶರಣರು, ಗುರುಲಿಂಗಜಂಗಮ ಈ ತ್ರಿವಿಧವನು. ಸುಖ ದುಃಖ ಚಿಂತೆ ಸಂತೋಷವೆಂಬುವಂ ಕಳೆದು, ಉತ್ಪತ್ತಿಸ್ಥಿತಿಲಯವೆಂಬುವ ಸುಟ್ಟು, ದೃಕ್ಕು, (ದರ್ಶನ), ದೃಶ್ಯವೆಂಬ ತ್ರಿಕರಣವ ಏಕವಮಾಡಿ, ಪಿಂಡಾಂಡವಾ ಬ್ರಹ್ಮಾಂಡವೊಂದೆಂಬುದ ಅರಿದು, ಸಂದ ಹರಿದು, ನಿಂದ ನಿಜಾನಂದದಲ್ಲಿ ಹಿಂದುಮುಂದೆಂಬುದನರಿಯದೆ, ನಿಮ್ಮೊಳೊಂದಾದ ಲಿಂಗೈಕ್ಯಂಗೆ ವಂದಿಸಿ ವಂದಿಸಿ ಎನ್ನ ಬಂಧನ ಹರಿಯಿತ್ತು, ನಾನು ಬಟ್ಟಬಯಲಾದೆನಯ್ಯಾ, ಕೂಡಲಸಂಗಮದೇವಾ.