ಬಸವಣ್ಣ   
  ವಚನ - 1365     
 
ಶ್ರೀಗುರು ತನ್ನ ಲಿಂಗವನೆ ಅಂಗದ ಮೇಲೆ ಬಿಜಯಂಗೆಯ್ಸಿದನಾಗಿ, ಆ ಲಿಂಗಕ್ಕೆ ನಾನು ಅಷ್ಟವಿಧಾರ್ಚನೆ, ಷೋಡಶೋಪಚಾರಗಳ ಮಾಡಿ, ಚತುರ್ವಿಧಫಲಪದಪುರುಷಾರ್ಥವ ಪಡೆದು, ಆ ಪರಿಭವಕ್ಕೆ ಬರಲೊಲ್ಲದೆ, ನಾನು ನಿಷ್ಕಳವೆಂಬ ಹೊಲದಲ್ಲಿ ಒಂದು ನಿಧಾನವ ಕಂಡೆ. ಆ ನಿಧಾನದ ಹೆಸರಾವುದೆಂದಡೆ; ತ್ರೈಲಿಂಗದ ಆದಿಮೂಲಾಂಕುರವೊಂದಾದ ಚರಲಿಂಗವೆಂದು. ಆ ಚರಲಿಂಗದ ಪಾದಾಂಬುವ ತಂದೆನ್ನ ಇಷ್ಟಲಿಂಗದ ಚತುರ್ವಿಧ ಫಲಪದಪುರುಷಾರ್ಥವೆಂಬ ಕರಂಗಳಂ ತೊಳೆವೆ. ಅದೆಂತೆಂದೆಡೆ; 'ಸಾಲೋಕ್ಯಂ ಚ ತು ಸಾಮೀಪ್ಯಂ ಸಾರೂಪ್ಯಂ ಚ ಸಾಯುಜ್ಯತಾ ತದುಪೇಕ್ಷಕ ಭಕ್ತಶ್ಚ ರೌರವಂ ನರಕಂ ವ್ರಜೇತ್' ಎಂದುದಾಗಿ, ಆ ಚರಲಿಂಗದ ಪ್ರಸಾದವ ತಂದೆನ್ನ ಇಷ್ಟಲಿಂಗದ ಜೀವಕಳೆಯ ಮಾಡುವೆ ಅದೆಂತೆಂದೆಡೆ: 'ಸ್ವಯಂಪ್ರಕಾಶರೂಪಶ್ಚ ಜಂಗಮೋ ಹಿ ನಿಗದ್ಯತೇʼ ಮತ್ತಂ, ʼಜಂಗಮಸ್ಯ ಪದೋದಂ ಚ ಯುಕ್ತಂ ಲಿಂಗಾಭಿಷೇಚನೇ ತತ್ಪ್ರಸಾದೋ ಮಹಾದೇವ ನೈವೇದ್ಯಂ ಮಂಗಲಂ ಪರಂ' ಎಂದುದಾಗಿ, ಆ ಲಿಂಗವೆ ಅಂಗ, ಅಂಗವೆ ಲಿಂಗ, ಆ ಲಿಂಗವೆ ಪ್ರಾಣ, ಆ ಪ್ರಾಣ ಲಿಂಗವಾದುದು. ಇದು ಚತುರ್ವಿಧಫಲಪದಪುರುಷಾರ್ಥವ ಮೀರಿದ ಘನವು. ಕೂಡಲಸಂಗಮದೇವಯ್ಯಾ. ಈ ದ್ವಯದ ಪರಿಯ ನಿಮ್ಮ ಶರಣರನೆ ಬಲ್ಲ.