ವಚನ - 138     
 
ಕಣ್ಗೆ ಶೃಂಗಾರ ಗುರುಹಿರಿಯರ ನೋಡುವುದು. ಕರ್ಣಕ್ಕೆ ಶೃಂಗಾರ ಪುರಾತನರ ಸುಗೀತಂಗಳ ಕೇಳುವುದು. ವಚನಕ್ಕೆ ಶೃಂಗಾರ ಸತ್ಯವ ನುಡಿವುದು. ಸಂಭಾಷಣೆಗೆ ಶೃಂಗಾರ ಸದ್ಭಕ್ತರ ನುಡಿಗಡಣ. ಕರಕ್ಕೆ ಶೃಂಗಾರ ಸತ್ಪಾತ್ರಕ್ಕೀವುದು. ಜೀವಿಸುವ ಜೀವನಕ್ಕೆ ಶೃಂಗಾರ ಗಣಮೇಳಾಪ ಇವಿಲ್ಲದ ಜೀವಿಯ ಬಾಳುವೆ ಏತಕ್ಕೆ ಬಾತೆಯಯ್ಯಾ ಚೆನ್ನಮಲ್ಲಿಕಾರ್ಜುನಾ.