ವಚನ - 199     
 
ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ? ತಂದು ಸುವರ್ಣವ ಕಡಿದೊರೆದಡೆ ಬೆಂದು ಕಳಂಕ ಹಿಡಿಯಿತ್ತೆ? ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ, ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು ನಿಮಗೇ ಹಾನಿ. ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಂದಡೆಯೂ ಶರಣೆಂಬುದ ಮಾಣೆ.