ವಚನ - 1186     
 
ಜಗತ್ತಿನ ಹೊಲೆಯನೆಲ್ಲವನು ಉದಕ ಕೊಳುವುದು, ಆ ಉದಕದ ಹೊಲೆಯ ಕಳೆದಲ್ಲದೆ ಲಿಂಗಕ್ಕೆ ಮಜ್ಜನಕ್ಕೆರೆವ ಲಿಂಗದ್ರೋಹಿಗಳ ಮಾತಕೇಳಲಾಗದು. ಮೇಘಬಿಂದುವಿನಿಂದಾದ ಉದಕ, ಸೂರ್ಯನ ಮುಖದಿಂದಾಗಿ ದ್ರವ್ಯ, ಅಗ್ನಿಯ ಮುಖದಿಂದಾದ ಪಾಕ- ಇಂತಿವರ ಪೂರ್ವಾಶ್ರಯವ ಕಳೆದಲ್ಲದೆ ಭಕ್ತ ಮಾಹೇಶ್ವರರೂ ಶೀಲಪರರೂ ಮೊದಲಾದ ನಾನಾ ವ್ರತಿಗಳು ಲಿಂಗಕ್ಕೆ ಮಜ್ಜನವ ಮಾಡಲಾಗದು, ಅರ್ಪಿಸಲಾಗದು, ಅದೆಂತೆಂದಡೆ: ಉದಕದ ಪೂರ್ವಾಶ್ರಯವನು, ದ್ರವ್ಯದ ಪೂರ್ವಾಶ್ರಯವನು, ಕಳೆದಲ್ಲದೆ ಲಿಂಗಕ್ಕೆ ಅರ್ಪಿಸಬಾರದು. ಇಂತೀ ತ್ರಿವಿಧದ ಪೂರ್ವಾಶ್ರಯವ ಕಳೆವ ಪರಿಯೆಂತೆಂದಡೆ: ಉದಕದ ಪೂರ್ವಾಶ್ರಯವ ಮಂತ್ರಯುಕ್ತವಾಗಿ ಜಂಗಮದ ಪಾದೋದಕದಿಂದ ಕಳೆದು ಪಾಕಪ್ರಯತ್ನವ ಮಾಡುವುದು. ದ್ರವ್ಯದ ಪೂರ್ವಾಶ್ರಯ ಜಂಗಮದ ಹಸ್ತ ಪರುಷದಿಂದ ಹೋದುದಾಗಿ ಅಗ್ನಿಯಲಾದ ಪಾಕದ ಪೂರ್ವಾಶ್ರಯವು ಜಂಗಮದ ಪ್ರಸಾದದಿಂದ ಹೋಯಿತ್ತು. ಈ ಶಿವನ ವಾಕ್ಯಗಳನರಿದು, ಮತ್ತೆ ಜಂಗಮದ ಪಾದೋದಕದಿಂದ ಪಾಕಪ್ರಯತ್ನವ ಮಾಡಲಾಗದು, ಲಿಂಗಕ್ಕೆ ಮಜ್ಜನಕ್ಕೆರೆಯಲಾಗದೆಂಬ ಶೈವ ಬೌದ್ಧ ಚಾರ್ವಾಕ ಚಾಂಡಾಲ ಶಿವದ್ರೋಹಿಯ ಮಾತಕೇಳಿ, ಬಿಟ್ಟನಾರೆ, ಅವ ವ್ರತಭ್ರಷ್ಟ ಅವನ ಮುಖವ ನೋಡಲಾಗದು. ಸಾಕ್ಷಿ:``ಸರ್ವಾಚಾರಪರಿಭ್ರಷ್ಟಃ ಶಿವಾಚಾರೇನ ಶುಧ್ಯತಿ ಶಿವಾಚಾರ ಪರಿಭ್ರಷ್ಟಃ ರೌರವಂ ನರಕಂ ವ್ರಜೇತ್'' ಇಂತೆಂದುದಾಗಿ, ಸಮಸ್ತವಾದ ವ್ರತಂಗಳಲ್ಲಿ ಭ್ರಷ್ಟರಾದವರ ಶಿವಾಚಾರದಲ್ಲಿ ಶುದ್ಧನ ಮಾಡಬಹುದು, ಶಿವಾಚಾರದಲ್ಲಿ ಭ್ರಷ್ಟರಾದವರಿಗೆ ರೌರವ ನರಕ ತಪ್ಪದು. ಅವಗೆ ಪ್ರಾಯಶ್ಚಿತ್ತವಿಲ್ಲಾಗಿ ಅವನ ಮುಖವ ನೋಡಲಾಗದು, ಮತ್ತಂ ``ವ್ರತಭ್ರಷ್ಟಮುಖಂ ದೃಷ್ಟ್ವಾಶ್ವಾನಸೂಕರವಾಯಸಂ| ಅಶುದ್ಧಸ್ಯ ತಥಾದೃಷ್ಟಂ ದೂರತಃ ಪರಿವರ್ಜಯೇತ್''- ಇಂತೆಂದುದಾಗಿ, ವ್ರತಶೀಲಗಳಲ್ಲಿ ನಿರತನಾದ ಶಿವಶರಣನು ಪಥದಲ್ಲಿ ಆಚಾರಭ್ರಷ್ಟನ ಕಂಡಡೆ, ಮುಖವ ನೋಡಿದಡೆ, ನಾಯ ಕಂಡಂತೆ ಸೂ[ಕರ]ನ ಕಂಡಂತೆ ಕಾಗೆಯ ಕಂಡಂತೆ ಹೇಸಿಗೆಯ ಕಂಡಂತೆ ತೊಲಗುವುದು. ಆ ವ್ರತವ ಬಿಡಿಸಿದವನು, ಅವನ ಮಾತ ಕೇಳಿ ಬಿಟ್ಟವನು, ಇಬ್ಬರೂ ಗುರುಲಿಂಗಜಂಗಮ ಪಾದೋದಕ ಪ್ರಸಾದಕ್ಕೆ ಹೊರಗಾಗಿ ಅನಂತಕಾಲ ನರಕವನೈದುವರು. ಆ ಪಾಪಿಗಳ ಮುಖವ ನೋಡಲಾಗದು, ನುಡಿಸಲಾಗದು ವ್ರತನಿಷ್ಠೆಯುಳ್ಳವರು ಕಾಣಾ ಗುಹೇಶ್ವರಾ.