ವಚನ - 1294     
 
ನಿರಾಳ ನಿಶ್ಶೂನ್ಯ ಪರಮಜಂಗಮದರಿವು ತಾನಾಗದೆ, ಬರಿದೆ ಅಹಂಕಾರದಿಂದ ಮೂರು ಮಲಂಗಳ ಸ್ವೀಕರಿಸುತ್ತ ನಾವೆ ಜಂಗಮವೆಂದು ನುಡಿವ ಕರ್ಮ ಪಾಷಂಡಿಗಳು- ಕಾಶಿ ಕೇದಾರ ಶ್ರೀಶೈಲ ವಿರೂಪಾಕ್ಷನೆಂದು, ಮತ್ತೆ ಈರಣ್ಣ ಮಲ್ಲಣ್ಣ ಬಸವಣ್ಣ ಇವರೇ ದೇವರೆಂದು ಆ ಕಲ್ಲುಗಳ ತಮ್ಮ ಮನೆಯೊಳಗೊಂದು ಮೂಲೆ ಸಂದಿ ಗೊಂದಿ ಗೊತ್ತಿನೊಳಗಿಟ್ಟು ಅದರ ಬಳಿದ ನೀರು, ಅವರೆಂಜಲ ತಿಂಬುವ ಪಶುಗಳಿಗೆ ದೇವಭಕ್ತರೆನಬಹುದೇನಯ್ಯಾ? ಎನಲಾಗದು. ಇಂತಪ್ಪ ಅನಾಚಾರಿ ಅಪಸ್ಮಾರಿ ಶ್ವಪಚರ ಜಂಗಮವೆಂದು ಪೂಜಿಸಲಾಗದು ಕಾಣಿರೊ. ವೀರಶೈವ ಆಚಾರವುಳ್ಳ ಭಕ್ತನು ಇದ ಮೀರಿ ಪೂಜಿಸಿದಡೆ ಅವರಿಬ್ಬರಿಗೆಯೂ ಭವಕರ್ಮಂಗಳು ತಪ್ಪವು ಕಾಣಾ ಗುಹೇಶ್ವರಾ.