ವಚನ - 1330     
 
ಪರವನರಿದ ಸತ್ಪುರುಷರ ಸಂಗದಿಂದ ಶಿವಯೋಗದ ವಚನಾಮೃತವನು, ಸದ್ಭಕ್ತಿಯುಳ್ಳ ಮಹೇಶ್ವರನು ತನ್ನ ಶ್ರೋತ್ರಮುಖದಲ್ಲಿ ಕೇಳಿ, ಮನೋಮುಖದಲ್ಲಿ ಹಾರೈಸಿ, ತೃಪ್ತಿಮುಖದಲ್ಲಿ ಸಂತೋಷವನೆಯ್ದಬಲ್ಲಡೆ ಆ ಸುಖವು ಪರಿಣಾಮವನೊಡಗೂಡುವುದು! ಹೀಂಗಲ್ಲದೆ, ಸಂಸಾರವಿಷಯರಸವ ತಮ್ಮ ಹೃದಯಕೂಪದಲ್ಲಿ ತುಂಬಿಕೊಂಡಿಪ್ಪ ಜೀವರು ಕಾಯದಲ್ಲಿ ವಚನಾಮೃತವ ತುಂಬಿದಡೆ, ಭಿನ್ನಘಟದಲ್ಲಿ ಉದಕವ ಹೊಯ್ದಂತೆ ಕಾಣಾ ಗುಹೇಶ್ವರಾ.