ವಚನ - 1504     
 
ವಿಶ್ವಾಸದಿಂದ ಭಕ್ತನಾಗಿ, ಆ ವಿಶ್ವಾಸದೊಳಗಣ ನೈಷ್ಠೆಯಿಂದ ಮಹೇಶ್ವರನಾಗಿ, ಆ ನೈಷ್ಠೆಯೊಳಗಣ ಸಾವಧಾನದಿಂದ ಪ್ರಸಾದಿಯಾಗಿ, ಆ ಸಾವಧಾನದೊಳಗಣ ಸ್ವಾನುಭಾವದಿಂದ ಪ್ರಾಣಲಿಂಗಿಯಾಗಿ, ಆ ಸ್ವಾನುಭಾವದೊಳಗಣ ಅರಿವಿನಿಂದ ಶರಣನಾಗಿ, ಆ ಅರಿವು ನಿಜದಲ್ಲಿ ಸಮರಸಭಾವವನೈದಿ ನಿರ್ಭಾವ ಪದದೊಳು ನಿಂದ ಭೇದವೇ ಐಕ್ಯಸ್ಥಲ ಕಾಣಾ ಗುಹೇಶ್ವರಾ.