ವಚನ - 1505     
 
ವೀರಧಾರುಣಿಯೊಳಗೆ ನಾರಿ ಶೃಂಗಾರವ ಮಾಡಿ ಈರೇಳು ಭುವನವ ಅಮಳೋಕ್ಯವ ಮಾಡಿ ಬಿಂದು ಶಕ್ತಿಯ ಭೇದ ಸಂದ ಯೋಗದ ಸುಖವ ತಂದು ಮೂರ್ತಿಗೊಳಿಸಿದವರಾರು? ಒಂದೆರಡರ ನುಡಿಯ ಮತ್ತೊಂದು ಗ್ರಹಿಸಿತ್ತ ಕಂಡೆ. ಬಿಂದುವಿನ ರಸದ ಪರೀಕ್ಷೆಯ ಭೇದವ ಚಂದ್ರಕಾಂತದ ಗಿರಿಯ ಅರುಣ ಚಂದ್ರರೊಡನೆ ಇಂಬಿನಲ್ಲಿಪ್ಪ ಪರಿಯ ನೋಡಾ! ಅಂಗೈಯ ತಳದೊಳು ಮೊಲೆ ಕಂಗಳಲ್ಲಿ ಕರಸನ್ನೆ ಇಂಬಿನಲ್ಲಿ ನೆರೆವ ಸುಖ ಒಂದೆ! ಅಂದಿನ ಆದಿ ಅನಾದಿಯ ಪ್ರತಿಬಿಂಬ ಇಂದೆನಗೆ ತೋರಿತ್ತು. ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ಶರಣೆನುತಿರ್ದೆನು.