ವಚನ - 775     
 
ಅಯ್ಯಾ! ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ, ಕ್ಷುತ್ತು, ಪಿಪಾಸೆ, ಶೋಕ, ಮೋಹ, ಜನನ ಮರಣಂಗಳ, ಅಡಿಮೆಟ್ಟಿ ನಿಂದು, ಅಷ್ಟವಿಧಾರ್ಚನೆ -ಷೋಡಶೋಪಚಾರಂಗಳ ಮಾಡಿ ಶಿವನನಂತ ಲೀಲೆಗಳನರ್ಚಿಸಿ ಫಲ - ಪದ - ಮೋಕ್ಷಂಗಳ ಪಡೆಯಬೇಕೆಂಬ ಬಯಕೆಯನುಳಿದು, ಅಂತರಂಗದ ಜ್ಞಾನ, ಬಹಿರಂಗದ ಸತ್ಕ್ರಿಯಾಚಾರಂಗಳಲ್ಲಿ ದೃಢ ಚಿತ್ತದಿಂದ ನಿಂದು, ಹಿಂದೆ ಹೇಳಿದ ಸದ್ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣಸ್ಥಲಂಗಳನೊಳಗು ಮಾಡಿಕೊಂಡು, ಪರಾತ್ಪರ ನಿತ್ಯತೃಪ್ತಾನಂದ ಮೂರ್ತಿಯಾಗಿ, ಝಗಝಗಿಸುವ ನಿಜೈಕ್ಯನಂತರಂಗದಲ್ಲಿ ಚಿದ್ರೂಪಲೀಲೆಯಿಂ ಸಾಕಾರ - ನಿರಾಕಾರ; ಸಕಲ - ನಿಃಕಲತತ್ತ್ವಂಗಳನೊಳಕೊಂಡು, ಹದಿಮೂರು ಸ್ಥಲಂಗಳ ಗರ್ಭೀಕರಿಸಿಕೊಂಡು, ಎಂಟುನೂರ ಆರುವತ್ತನಾಲ್ಕು ಮಂತ್ರಮಾಲಿಕೆಗಳ ಪಿಡಿದುಕೊಂಡು, ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಜ್ಯೋತಿ ಜ್ಯೋತಿ ಕೂಡಿ ಭಿನ್ನ ದೋರದ ಹಾಂಗೆ ಏಕಸ್ವರೂಪಿನಿಂದ ವೇದಸ್ವರೂಪ ಮಹಾಲಿಂಗವಾಗಿ ನೆಲಸಿರ್ಪುದು ನೋಡ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.