ವಚನ - 792     
 
ಅಯ್ಯಾ! ನಿರವಯಶೂನ್ಯಲಿಂಗದೇಹಿ ನಿಜಕರುಣಪ್ರಸಾದಾತ್ಮನು ಆ ನಿರವಯ ಶೂನ್ಯಲಿಂಗದಾಚಾರದಲ್ಲಿಯೆ ನಡೆವನಯ್ಯ! ಲೋಕವರ್ತಕ ಲೋಕಚಾತುರ್ಯಕ್ಕೆ, ಲೋಕವ್ಯವಹರಣೆಯನನುಕರಿಸಿ ನಡೆವನಲ್ಲ! ನಿಜಶಿವಜ್ಞಾನ-ನಿಜಶಿವಕ್ರಿಯಾಪ್ರಕಾಶವ ಸಂಬಂಧಿಸಿಕೊಂಡು ಸರ್ವಾಂಗವು ನಿರವಯಶೂನ್ಯಲಿಂಗರೂಪವಾಗಿ ಲಿಂಗಕ್ಕೆ ಲಿಂಗವೆ ಭಾಜನ ಪದಾರ್ಥ-ಪ್ರಸಾದ-ಪರಿಣಾಮವಾಗಿರಬಲ್ಲಡೆ ಅದು ಲಿಂಗೈಕ್ಯ ನೋಡ! ನೆಲನಿಲ್ಲದ ನಿರ್ಮಲ ಚಿದ್ಭೂಮಿಯಲ್ಲಿ ಸ್ವಯಜ್ಞಾನಶಿಶು ಉದಯವಾಯಿತ್ತು ನೋಡ! ಆ ಸ್ವಯಜ್ಞಾನ ಶಿಶು ಊಧ್ರ್ವಲೋಕಕ್ಕೆ ಹೋಗಿ ವ್ಯೋಮಾಮೃತ ಪ್ರಸಾದವನುಂಡು ನಾಮ-ರೂಪು-ಕ್ರಿಯೆಗಳನಳಿದು, ನಿರವಯಶೂನ್ಯಲೀಲೆಯ ಧರಿಸಿ ಸೋಮನಾಳದಲ್ಲಿ ಶುಭ್ರ ಕಳೆ, ಪಿಂಗಳನಾಳದಲ್ಲಿ ಸುವರ್ಣಕಳೆ, ಸುಷುಮ್ನನಾಳದಲ್ಲಿ ಸುಜ್ಞಾನ ಜ್ಯೋತಿ ಪ್ರಕಾಶದಂತೆ ಏಳುನೂರ ಎಪ್ಪತ್ತುನಾಳದಲ್ಲಿ ಹೊಳೆವುತ್ತಿರ್ಪ ಪರಮಗುರು ಸಂಗನಬಸವಣ್ಣನ ಬೆಳಗಿನ ನಿಜಪ್ರಸಾದದೊಳಗೆ ಗುಹೇಶ್ವರ ಪ್ರಭುವೆಂಬ ರೂಪತಾಳಿ, ಪಕ್ವವಾದ ಮೇಲೆ ಮತ್ತಲ್ಲಿಯೆ ನಿರವಯಶೂನ್ಯವಪ್ಪುದು ತಪ್ಪದು ನೋಡ! ಚೆನ್ನಬಸವಣ್ಣ.