ವಚನ - 410     
 
ಕರವೆ ಭಾಂಡವಾಗಿ ಜಿಹ್ವೆಯೆ ಕರವಾಗಿ, ಇಂದ್ರಿಯಂಗಳೈ ಮುಖವಾಗಿಪ್ಪ ಪ್ರಸಾದಿಯ ಪರಿಯಿನ್ನೆಂತೋ? ಆನಂದದಲ್ಲಿ ಸಾನಂದವನರ್ಪಿಸಿ ಸಾನಂದದಲ್ಲಿ ಸಯವಾಗಿಪ್ಪ ಪ್ರಸಾದಿಯ ಪರಿಯಿನ್ನೆಂತೊ? ತನುತ್ರಯಂಗಳ ಮೀರಿ ಮನತ್ರಯಂಗಳ ದಾಂಟಿಪ್ಪ ಪ್ರಸಾದಿಗೆ ಆವುದ ಸರಿಯೆಂಬೆ? ಬಂದುದನತಿಗಳೆಯೆ, ಬಾರದುದ ಬಯಸೆ. ತನುಮುಖವೆಲ್ಲ ಲಿಂಗಮುಖ, ಸ್ವಾದಿಸುವವೆಲ್ಲ ಲಿಂಗಾರ್ಪಿತ; ಜಾಗ್ರತ್ ಸ್ವಪ್ನ ಸುಷುಪ್ತಿಯಲ್ಲಿ ಲಿಂಗಾರ್ಪಿತವಲ್ಲದೆ ಅನರ್ಪಿತವ ನೋಡ; ತಟ್ಟುವ ಮುಟ್ಟುವ ಭೇದಂಗಳೆಲ್ಲವು ಸರ್ವಾರ್ಪಿತ. ಆತನುರುತರ ಸಮ್ಯಕ್ಜ್ಞಾನಿಯಾದ ಕಾರಣ ಪ್ರಸನ್ನತೆಯಾಯಿತ್ತು. ಪ್ರಸನ್ನ ಪ್ರಸಾದತೆಯಲ್ಲಿ ನಿತ್ಯನಪ್ಪಾತ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಉರುತರ ಮಹಾಜ್ಯೋತಿರ್ಮಯನು.