ವಚನ - 1496     
 
ವಾಗ್ಬ್ರಹ್ಮಿಗಳೆಲ್ಲರು ಪಡುವ ಪಾಟ ನೋಡಿ ನಮ್ಮ ಭಕ್ತರು, ತ್ಯಾಗಾಂಗದಲ್ಲಿ, ಇಷ್ಟ ಪ್ರಾಣ ಭಾವಕ್ಕೆ ಬಾಹ್ಯ ಪದಾರ್ಥರೂಪವ ಈ ಕ್ಷಣ ಜ್ಞಾನಸ್ಪರ್ಶದಿಂದ ಅರ್ಪಿಸಿ ದೇಹಪ್ರಸಾದಿಗಳಾಗಿ ಚರಶೇಷದಲ್ಲಿ ಇಷ್ಟಲಿಂಗಪೂಜಕರಾಗಿ ಅನಿಷ್ಟವ ಪರಿಹರಿಸಿದರು. ಭೋಗಾಂಗದಲ್ಲಿ ಇಷ್ಟ ಪ್ರಾಣ ಭಾವಕ್ಕೆ ದೇಹಪದಾರ್ಥರೂಪವ ರೂಪು ರುಚಿ ತೃಪ್ತಿಯಿಂದ ಅರ್ಪಿಸಿ ಪ್ರಾಣಪ್ರಸಾದಿಗಳಾಗಿ, ಲಿಂಗಶೇಷದಲ್ಲಿ ಪ್ರಾಣಲಿಂಗ ನೈಷ್ಠಿಕರಾಗಿ ವಾಯುಗುಣವಿಕಾರವ ಕೆಡಿಸಿದರು. ಯೋಗಾಂಗದಲ್ಲಿ ಇಷ್ಟ ಪ್ರಾಣ ಭಾವಕ್ಕೆ ವಾಯು ಪದಾರ್ಥರೂಪವ ಸ್ಥೂಲ ಸೂಕ್ಷಕಾರಣದಿಂದ ಅರ್ಪಿಸಿ ಮಹಾಪ್ರಸಾದಿಗಳಾಗಿ, ಗುರುಶೇಷದಲ್ಲಿ ಮನೋಗುಣ ವಿಕಾರ ಪರಿಹರಿಸಿದರು ಗುಹೇಶ್ವರಲಿಂಗದಲ್ಲಿ.