ವಚನ - 1930     
 
ಲೋಕದಲ್ಲಿಹ ನೂರಾರು ಗುರುಗಳ ನೋಡಿ ನೋಡಿ ನಾನು ಬೇಸರುಗೊಂಡೆನಯ್ಯಾ. ವಿತ್ತಾಪಹಾರಿ ಗುರುಗಳು ನೂರಾರು; ಶಾಸ್ತ್ರಾರ್ಥ ಹೇಳುವ ಗುರುಗಳು ನೂರಾರು; ಮಂತ್ರತಂತ್ರದಿಂದುಭಯ ಲೋಕದಲ್ಲಿ ಸುಖದುಃಖವೀವ ಗುರುಗಳು ನೂರಾರು; ಸತ್ಕರ್ಮೋಪದೇಶವನರುಹಿ ಸ್ವರ್ಗಮರ್ತ್ಯದಲ್ಲಿ ಸುಖವೀವ ಗುರುಗಳು ನೂರಾರು; ವಿಚಾರಮುಖದಿಂದ ಷಟ್ಸಾಧನೆಯನರುಹುವ ಗುರುಗಳು ನೂರಾರು. ವಿಷಯಂಗಳೆಲ್ಲ ಮಿಥ್ಯಂಗಳೆಂದರುಹಿ ಆತ್ಮಾನುರಾಗತ್ವವನೀವ ಗುರುಗಳು ನೂರಾರು; ಶಿವಜೀವರ ಏಕತ್ವವನರುಹಿ ನಿರ್ಮಲಜ್ಞಾನವೀವ ಗುರುಗಳು ನೂರಾರು; ಸಂಶಯಾಳಿಗಳನೆಲ್ಲ ಜ್ಞಾನಾಗ್ನಿಯಿಂದ ದಹಿಸಿ ಮುಕ್ತಿಯ ಹಂಗೆಂಬುದ ಅರುಹಿನ ಬಂಧದಲ್ಲಿರಿಸಿದ ಗುರು ಚೆನ್ನಬಸವಣ್ಣನಲ್ಲದೆ ಮತ್ತೋರ್ವನ ಕಾಣೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.