ವಚನ - 783     
 
ಅಯ್ಯಾ! ತನುತ್ರಯಂಗಳು, ಜೀವತ್ರಯಂಗಳು, ಆತ್ಮತ್ರಯಂಗಳು, ಅವಸ್ಥಾತ್ರಯಂಗಳು, ಗುಣತ್ರಯಂಗಳು, ಮನತ್ರಯಂಗಳು, ತಾಪತ್ರಯಂಗಳು, ಕಾಲತ್ರಯಂಗಳು, ಕರ್ಮತ್ರಯಂಗಳು, ಭಾವತ್ರಯಂಗಳು, ಮಲತ್ರಯಂಗಳು, ಕರಣತ್ರಯಂಗಳು ಮೊದಲಾದ ಪ್ರವೃತ್ತಿಮಾರ್ಗವನುಳಿದು, ಹಿಂದೆ ಹೇಳಿದ ಸದ್ಭಕ್ತ-ಮಹೇಶ್ವರಸ್ಥಲದಲ್ಲಿ ನಿಂದು, ಅಷ್ಟಾವಧಾನ ಅವಿರಳಾನಂದಮೂರ್ತಿಯಾಗಿ ಪ್ರಕಾಶಿಸುವ ನಿಜಪ್ರಸಾದಿಯಂತರಂಗದಲ್ಲಿ ಚಿದ್ಘನ ಸ್ವರೂಪವಲೀಲೆಯಿಂ ಅಂತರಂಗದಲ್ಲಿ ಅಂಗತತ್ತ್ವ, ಲಿಂಗತತ್ತ್ವ, ಶಿವತತ್ತ್ವ, ಪರತತ್ತ್ವ ಮೊದಲಾದ ಸಮಸ್ತ ತತ್ತ್ವಂಗಳನೊಳಕೊಂಡು, ಹದಿನಾರು ಸ್ಥಲಂಗಳ ಗರ್ಭೀಕರಿಸಿಕೊಂಡು, ನಾಲ್ಕು ಸಾವಿರದ ಮುನ್ನೂರಿಪ್ಪತ್ತು ಮಂತ್ರಮಾಲಿಕೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಪಾದೋದಕ ಪ್ರಸಾದವ ಕೊಂಡು ಅಂಗ-ಮನ-ಪ್ರಾಣ-ಭಾವ-ಇಂದ್ರಿಯಂಗಳೆಲ್ಲ ಪಾದೋದಕ ಪ್ರಸಾದಮಯವೆಂಬ ಹರಗುರುವಾಕ್ಯದಿಂ ಚಿನ್ನಬಣ್ಣ ಪ್ರಕಾಶದ ಹಾಂಗೆ ಭಿನ್ನ ಭಾವವಿಲ್ಲದೆ ಏಕರೂಪಿನಿಂದ ನಿರೀಕ್ಷಣಾಮೂರ್ತಿ ಶಿವಲಿಂಗವಾಗಿ ನೆಲಸಿರ್ಪುದು ನೋಡ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣಾ.