ವಚನ - 844     
 
ಅವಧಿ ಅಳಿಯಿತ್ತು ವ್ಯವಧಾನ ಉಳಿಯಿತ್ತು. ನಿಜವೆ ನಿಜವನೊಡಗೂಡಿತ್ತು ಕೇಳಾ ಬಸವಣ್ಣ. ಕಲಿಯುಗದಲ್ಲಿ ಮುಂದೆ ಇರಬಾರದು ನಿಜ ಶರಣಂಗೆ. ನಡೆ ನೀನು ಕಪ್ಪಡಿಯ ಸಂಗಯ್ಯನಲ್ಲಿ ಒಡಗೂಡು. ಉಳುಮೆಯಲ್ಲಿ ನಿಜವನೆಯ್ದು ನಡೆ, ಚೆನ್ನಬಸವಣ್ಣಾ. ಮಹವನೊಡಗೂಡು ಮಡಿವಾಳಯ್ಯ. ಸೊಡ್ಡಳ ಬಾಚರಸರು ಮೊದಲಾದ ಪ್ರಮಥರೆಲ್ಲರು ನಿಜವನೆಯ್ದುವುದು ನಿರ್ವಯಲ ಸಮಾಧಿಯಲ್ಲಿ. ಬಗಿದು ಹೋಗಿ ಲಿಂಗದೊಳಗೆ ಹೊಗುವರೆಲ್ಲರೂ! ನಡೆಯಿರಿ ಕಾಯವೆರಸಿ ಕೈಲಾಸಕ್ಕೆ, ಕಾಯಸಹಿತ ಎಯ್ದುವುದು. ನಿಮಗೆಲ್ಲರಿಗೆಯೂ ಉಪದೇಶಮಂತ್ರ ತಪ್ಪದು. ನಮಗೆ ಕದಳಿಯಲ್ಲಿ ಹೊಕ್ಕು ನಿಜದಲ್ಲಿ ಒಡಗೂಡುವ ಪರಿಣಾಮ. ಇದು ನಮ್ಮ ಗುಹೇಶ್ವರಲಿಂಗದ ಅಣತಿ ನಿಮಗೆಲ್ಲರಿಗೆಯೂ.